ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಿಲ್ಲ, ಅಸಮಾಧಾನದ ವದಂತಿ ಸುಳ್ಳು: ಯತೀಂದ್ರ ಸ್ಪಷ್ಟನೆ

ವಿಜಯಪುರ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಲಾಗಿದೆ ಹಾಗೂ ಅವರಿಗೆ ಅಸಮಾಧಾನದ ವದಂತಿ ಸುಳ್ಳು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೂ ಮುನ್ನ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರ ಅಭಿಪ್ರಾಯಗಳನ್ನು ಹಾಗೂ ಅವರು ನೀಡಿದ್ದ ಆಕಾಂಕ್ಷಿಗಳ ಪಟ್ಟಿಯನ್ನು ಪರಿಗಣಿಸಲಾಗಿದೆ. ಲಭ್ಯವಿದ್ದ 15 ಸ್ಥಾನಗಳ ಪೈಕಿ ಸಾಧ್ಯವಾದಷ್ಟು ಹೆಸರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.
ಖಾತೆ ಹಂಚಿಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದರ ಬಗ್ಗೆ ಹೈಕಮಾಂಡ್ಗೆ ಮನವಿ ಮಾಡಲಿದ್ದು, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಪ್ರಮಾಣ ವಚನದಂದು ಸಿದ್ದರಾಮಯ್ಯ ಅವರ ಹುಟ್ಟುಹಬ್ಬವಿದ್ದ ಕಾರಣ ಅಭಿಮಾನಿಗಳು ಹಾಗೂ ಹಲವು ಮುಖಂಡರು ಅವರನ್ನು ಭೇಟಿಯಾಗಲು ಬರುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಸಂಪುಟದಲ್ಲಿ ಮಹಿಳಾ ಸಚಿವರಿಲ್ಲದಿರುವ ಬಗ್ಗೆ ಉತ್ತರಿಸಿ, ಮಹಿಳೆಯೊಬ್ಬರನ್ನು ಸಚಿವರನ್ನಾಗಿ ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದು, ಶೀಘ್ರದಲ್ಲೇ ಸೂಕ್ತ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದರು.






