ಹುಣಸಗಿ | ದ್ವಿಭಾಷಾ ಶಿಕ್ಷಣ ನೀತಿ ಮರುಪರಿಶೀಲನೆಗೆ ಆಗ್ರಹ

ಹುಣಸಗಿ: ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿವರೆಗೆ ಜಾರಿಗೆ ತಂದಿರುವ ದ್ವಿಭಾಷಾ ಶಿಕ್ಷಣ ನೀತಿಯ ಸಾಧಕ-ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಕನ್ನಡ ಭಾಷೆ ಹಾಗೂ ಕನ್ನಡ ಮಾಧ್ಯಮದ ಹಿತಾಸಕ್ತಿಯನ್ನು ಕಾಪಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ವತಿಯಿಂದ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಭಾಸಾಪ ಹುಣಸಗಿ ತಾಲೂಕು ಅಧ್ಯಕ್ಷರು, ಜೂನ್ 19ರಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ ನೂತನ ಶಿಕ್ಷಣ ನೀತಿಯ ಪರಿಣಾಮಗಳ ಕುರಿತು ಚರ್ಚಿಸಲಾಯಿತು. 2026-27ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಬೋಧಿಸುವ ದ್ವಿಭಾಷಾ ಶಿಕ್ಷಣ ಯೋಜನೆ ಜಾರಿಗೆ ತಂದಿರುವುದು ಸೂಕ್ತವಲ್ಲ ಎಂದು ಹೇಳಿದರು.
ಯೋಜನೆಯ ಅನುಷ್ಠಾನಕ್ಕೂ ಮುನ್ನ ಕನ್ನಡ ಮಾಧ್ಯಮದಲ್ಲಿ ಬೋಧಿಸುತ್ತಿದ್ದ ಶಿಕ್ಷಕರಿಗೆ ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ಐದು ದಿನಗಳ ತರಬೇತಿ ನೀಡಲಾಗಿದೆ. ಕನ್ನಡ ಹಾಗೂ ಆಂಗ್ಲ ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಮುದ್ರಿಸಿ ಬೋಧನೆ ನಡೆಸಲಾಗುತ್ತಿದೆ. ಆದರೆ ದ್ವಿಭಾಷಾ ಶಿಕ್ಷಣ ಎಂದು ಹೇಳಿಕೊಂಡಿದ್ದರೂ ಕೆಲವು ಅಧ್ಯಾಯಗಳು, ಹಾಡುಗಳು ಸೇರಿದಂತೆ ಪಠ್ಯದ ಪ್ರಮುಖ ಭಾಗಗಳನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡಲಾಗಿದೆ. ಇದರಿಂದ ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಕನ್ನಡಕ್ಕಿಂತ ಆಂಗ್ಲ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವ ವಾತಾವರಣ ನಿರ್ಮಾಣವಾಗುವ ಆತಂಕವಿದೆ ಎಂದು ಹೇಳಿದರು.
ಪರೀಕ್ಷೆಯಲ್ಲಿ ಸರಿಯಾದ ಉತ್ತರವನ್ನು ಆಂಗ್ಲ ಭಾಷೆಯಲ್ಲಿ ಬರೆದ ವಿದ್ಯಾರ್ಥಿಗಳಿಗೆ ‘ಎ+’ ಹಾಗೂ ಅದೇ ಉತ್ತರವನ್ನು ಕನ್ನಡದಲ್ಲಿ ಬರೆದ ವಿದ್ಯಾರ್ಥಿಗಳಿಗೆ ‘ಬಿ+’ ಶ್ರೇಯಾಂಕ ನೀಡುವಂತೆ ಸುತ್ತೋಲೆಯಲ್ಲಿ ಸೂಚಿಸಿರುವುದು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಇದು ವಿದ್ಯಾರ್ಥಿಗಳು ಕನ್ನಡದ ಬದಲಾಗಿ ಆಂಗ್ಲ ಭಾಷೆಯಲ್ಲೇ ಕಲಿಯಲು ಮತ್ತು ಉತ್ತರ ಬರೆಯಲು ಪರೋಕ್ಷ ಒತ್ತಡ ಹೇರುವಂತಾಗಿದೆ ಎಂದು ಅವರು ಆರೋಪಿಸಿದರು.
ಸಾಮಾಜಿಕ ಕಾರ್ಯಕರ್ತ ಬಸವರಾಜ್ ಮೇಲಿನಮನಿ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 2026ರ ಕರಡು ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕನ್ನಡ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡದಿರುವುದರ ಬಗ್ಗೆಯೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ ಎಂದರು.
ವಿಜ್ಞಾನ, ಗಣಿತ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಆಂಗ್ಲ ಭಾಷಾ ಪ್ರೌಢಿಮೆಯನ್ನು ಕಡ್ಡಾಯಗೊಳಿಸಿರುವುದು ಕನ್ನಡ ಮಾಧ್ಯಮದ ಶಿಕ್ಷಣ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಕನ್ನಡ ಭಾಷೆ ಹಾಗೂ ಕನ್ನಡ ಮಾಧ್ಯಮದ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಭಾಸಾಪ ಕಾರ್ಯದರ್ಶಿ ನಿಂಗಣ್ಣ ಎಣ್ಣಿವಡಿಗೇರ, ನಿತಿನ್ ತಿವಾರಿ, ಮಹೇಶ ಸ್ಥಾವರಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.






