ಹುಣಸಗಿ | ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ: ಪಿಎಸ್ಐ ರಾಹುಲ್ ಪವಾಡೆ

ಹುಣಸಗಿ : 14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ರಾಹುಲ್ ಪವಾಡೆ ಎಚ್ಚರಿಕೆ ನೀಡಿದರು.
ಪಟ್ಟಣದ ಪೊಲೀಸ್ ಇಲಾಖೆ ವತಿಯಿಂದ ಬಾಲ ಕಾರ್ಮಿಕ ಪದ್ಧತಿ ಪತ್ತೆಹಚ್ಚುವ ವಿಶೇಷ ಕಾರ್ಯಾಚರಣೆ ನಡೆಸಿ ಹೋಟೆಲ್, ಡಾಬಾ, ಲಾಡ್ಜ್, ಪೆಟ್ರೋಲ್ ಬಂಕ್ ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ತಪಾಸಣೆ ನಡೆಸಿದ ಬಳಿಕ ಅವರು ಮಾತನಾಡಿದರು.
ಬಾಲ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಕೆಲಸಕ್ಕೆ ಕಳುಹಿಸುವುದು ಮತ್ತು ಅವರನ್ನು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಇಂತಹ ಕೃತ್ಯದಲ್ಲಿ ತೊಡಗಿರುವವರು ಹಾಗೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅಡಿಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸುವುದು ಗಂಭೀರ ಅಪರಾಧವಾಗಿದ್ದು, ಉಲ್ಲಂಘನೆ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಿಎಸ್ಐ ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಐ ಚಂದ್ರಾಮ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಸುಭಾಷ್, ಡಂಬಳ, ಶಿವರಾಜ್, ಪ್ರಶಾಂತಿ, ಸಿದ್ದು, ಅಮರೇಶ್ ಸೇರಿದಂತೆ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.




