ಮನೆ ಕಳ್ಳತನ ಪ್ರಕರಣ ಭೇದಿಸಿದ ಹುಣಸಗಿ ಪೊಲೀಸರು; 73 ಗ್ರಾಂ ಚಿನ್ನ, 2 ಲಕ್ಷ ರೂ. ನಗದು ವಶ

ಹುಣಸಗಿ: ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಹುಣಸಗಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 73 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಸಿದ್ದಾಪುರ (ಬಿ) ಗ್ರಾಮದ ಯಲ್ಲಪ್ಪ ಬಸಪ್ಪ ಹುಲಕೇರಿ ಅವರು ಏಪ್ರಿಲ್ 18ರಂದು ಹುಣಸಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಏಪ್ರಿಲ್ 17ರ ರಾತ್ರಿ 9.30ರಿಂದ ಏಪ್ರಿಲ್ 18ರ ಬೆಳಗ್ಗೆ 6 ಗಂಟೆಯೊಳಗಿನ ಅವಧಿಯಲ್ಲಿ ಅಪರಿಚಿತರು ಜಮೀನಿನಲ್ಲಿದ್ದ ಅವರ ಮನೆಗೆ ನುಗ್ಗಿ, ಕಬ್ಬಿಣದ ಪೆಟ್ಟಿಗೆಯನ್ನು ಹೊರಗೆ ತೆಗೆದುಕೊಂಡು ಹೋಗಿ, ಅದರಲ್ಲಿದ್ದ 73 ಗ್ರಾಂ ಚಿನ್ನಾಭರಣ ಹಾಗೂ 4 ಲಕ್ಷ ರೂ. ನಗದು ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 65/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)-2023ರ ಕಲಂ 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುರಪುರ ಉಪವಿಭಾಗದ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್., ಪಿಎಸ್ಐ ರಾಹುಲ್ ಪವಾಡೆ, ಕ್ರೈಂ ಪಿಎಸ್ಐ ಬಾಗಣ್ಣ ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ತನಿಖೆಯ ವೇಳೆ ಪ್ರಕರಣದ ಆರೋಪಿ ದೇವಪ್ಪ ಯಮನಪ್ಪ ಹುಲ್ಲಿಕೇರಿ (ಸಿದ್ದಾಪುರ-ಬಿ) ಎಂಬಾತನನ್ನು ಜುಲೈ 10ರಂದು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ವಿಚಾರಣೆ ವೇಳೆ ಆರೋಪಿಯಿಂದ 73 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುರಪುರ ಡಿವೈಎಸ್ಪಿ ಅಭಿನಂದಿಸಿ, ಬಹುಮಾನ ಘೋಷಿಸಿದ್ದಾರೆ.






