ಯಾದಗಿರಿಯನ್ನು ಬರಪೀಡಿತ ಜಿಲ್ಲೆ ಘೋಷಿಸಲು ಜಯ ಕರ್ನಾಟಕ ಆಗ್ರಹ

ಯಾದಗಿರಿ: ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು, ತುರ್ತಾಗಿ ಮೋಡ ಬಿತ್ತನೆ ಕೈಗೊಳ್ಳಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳು ಮತ್ತು ಸಹಕಾರ ಸಂಘಗಳಲ್ಲಿನ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಜಿಲ್ಲೆಯಾದ್ಯಂತ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹತ್ತಿ, ಶೇಂಗಾ, ಹೆಸರು, ಉದ್ದು, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ. ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ನಂಬಿ ರೈತರು ಬಿತ್ತನೆ ಮಾಡಿದ್ದರೂ, ನಂತರ ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಬೆಳೆಗಳು ನಾಶವಾಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹನುಮಂತರಾಯ ದೊರೆ ವನದುರ್ಗ, ರೈತ ದೇಶದ ಬೆನ್ನೆಲುಬಾಗಿದ್ದು, ಅನ್ನದಾತನ ಸಂಕಷ್ಟವನ್ನು ಸರ್ಕಾರ ನಿರ್ಲಕ್ಷಿಸಬಾರದು. ವರದಿಗಳಿಗಾಗಿ ಕಾಯದೆ ತಕ್ಷಣ ಮಧ್ಯಂತರ ಪರಿಹಾರ ಘೋಷಿಸಿ ರೈತರ ನೆರವಿಗೆ ಧಾವಿಸಬೇಕು. ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಕೃಷಿ ಮಾಡಿದ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದು, ಸರ್ಕಾರ ಮಾನವೀಯ ನೆಲೆಯಲ್ಲಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ವಿಜಯಕುಮಾರ್ ಮಗ್ದಾಂಪುರ ಮಾತನಾಡಿ, ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಸಮರ್ಪಕ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಇತ್ತೀಚೆಗೆ ಚಟ್ನಳ್ಳಿ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಅವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿಲ್ಲ. ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದು ಯಾದಗಿರಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಒತ್ತಡ ತರಬೇಕಾದ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ ಎಂದು ಹೇಳಿದರು.
ಮಳೆ ಕೊರತೆಯಿಂದ ಜಿಲ್ಲೆಯ ಜಲಾಶಯಗಳು, ಕೆರೆ-ಕಟ್ಟೆಗಳು ಬತ್ತುತ್ತಿದ್ದು, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣಿಸಿದೆ. ಸರ್ಕಾರ ತಕ್ಷಣ ಮೋಡ ಬಿತ್ತನೆ ಕೈಗೊಂಡು ಮಳೆ ಸುರಿಯಲು ಕ್ರಮ ವಹಿಸಬೇಕು. ಜೊತೆಗೆ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ಘೋಷಿಸಿ, ರಾಷ್ಟ್ರೀಕೃತ ಬ್ಯಾಂಕ್ಗಳು ಹಾಗೂ ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಮಾತನಾಡಿದರು. ದೀಪಕ ಪೋದ್ದಾರ, ಮಲ್ಲಿಕಾರ್ಜುನ ದೇವದುರ್ಗ, ಅರುಣ, ಮಲ್ಲಿಕಾರ್ಜುನ, ದೇವು ರಾಮಸಮುದ್ರ ಸೇರಿದಂತೆಯೇ ಇತರರಿದ್ದರು.






