ಯಾದಗಿರಿ ಜಿಲ್ಲೆಯ ಉಳಿದ ಐದು ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಲು ಕರವೇ ಆಗ್ರಹ

ಯಾದಗಿರಿ: ಶಹಾಪುರ ತಾಲೂಕನ್ನು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರ, ಜಿಲ್ಲೆಯ ಉಳಿದ ಯಾದಗಿರಿ, ಗುರುಮಠಕಲ್, ವಡಗೇರಾ, ಸುರಪುರ ಹಾಗೂ ಹುಣಸಗಿ ತಾಲೂಕುಗಳನ್ನೂ ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಯಾದಗಿರಿ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಎದುರು ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೇ ಮುಖಂಡ ಮಲ್ಲು ಮಾಳಿಕೇರಿ, ಶಹಾಪುರ ತಾಲೂಕೊಂದನ್ನೇ ಬರಪೀಡಿತವೆಂದು ಘೋಷಿಸಿರುವುದು ಜಿಲ್ಲೆಯ ಉಳಿದ ತಾಲೂಕುಗಳ ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಆರೋಪಿಸಿದರು.
ಜೂನ್ ಮೊದಲ ವಾರದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಶೇ.90ರಷ್ಟು ಬಿತ್ತನೆ ಮಾಡಿದ್ದರು. ಆದರೆ ಜೂನ್ ಅಂತ್ಯದಿಂದ ಜುಲೈ ಮೊದಲ ವಾರದವರೆಗೆ ಮಳೆ ಕೈಕೊಟ್ಟ ಪರಿಣಾಮ ಹೆಸರು, ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿ ಶೇ.50ರಷ್ಟು ಮಾತ್ರ ಮೊಳಕೆಯಾಗಿದೆ ಎಂದು ಹೇಳಿದರು.
ಮಳೆ ಕೊರತೆಯಿಂದ ರೈತರು ಎರಡನೇ ಬಾರಿ ಬಿತ್ತನೆ ಮಾಡಿದರೂ ಸಮರ್ಪಕ ಮಳೆಯಾಗದೆ ಬೆಳೆಗಳು ಹಾನಿಗೀಡಾಗಿವೆ. ಒಣ ಬೇಸಾಯಕ್ಕೆ ಪ್ರತಿ ಎಕರೆಗೆ 30ರಿಂದ 40 ಸಾವಿರ ರೂ. ಹಾಗೂ ನೀರಾವರಿ ಪ್ರದೇಶದಲ್ಲಿ 45ರಿಂದ 50 ಸಾವಿರ ರೂ. ವರೆಗೆ ವೆಚ್ಚ ಮಾಡಿದ ರೈತರು ಸಾಲದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.
ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಮಾತನಾಡಿ, ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿದಿದ್ದು, ಕೃಷಿ ಹಾಗೂ ಕೂಲಿ ಕೆಲಸಗಳ ಕೊರತೆಯಿಂದ ಸಾವಿರಾರು ಜನರು ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸರ್ಕಾರದ ಗಮನಕ್ಕೆ ತರುವಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿಫಲವಾಗಿವೆ ಎಂದು ಆರೋಪಿಸಿದರು.
ಯಾದಗಿರಿ ಜಿಲ್ಲೆಯ ಉಳಿದ ಐದು ತಾಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಕೇಂದ್ರ ಸರ್ಕಾರದ ಎನ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಎಸ್ಡಿಆರ್ಎಫ್ ಅನುದಾನದಡಿ ರೈತರಿಗೆ ಪರಿಹಾರ ನೀಡಬೇಕು. ಒಣ ಬೇಸಾಯಕ್ಕೆ ಪ್ರತಿ ಎಕರೆಗೆ 25ರಿಂದ 30 ಸಾವಿರ ರೂ. ಹಾಗೂ ನೀರಾವರಿ ಪ್ರದೇಶಕ್ಕೆ ಪ್ರತಿ ಎಕರೆಗೆ 45ರಿಂದ 50 ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸರ್ಕಾರ ಶೀಘ್ರವೇ ಸೂಕ್ತ ಕ್ರಮ ಕೈಗೊಂಡು ಜಿಲ್ಲೆಯ ಉಳಿದ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸದಿದ್ದರೆ ಸೆಪ್ಟೆಂಬರ್ 15ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಿದ್ದುನಾಯಕ ಹತ್ತಿಕುಣಿ, ನಿಂಗಪ್ಪ ಗುಡಗುಡಿ, ವಿಶ್ವರಾಜ ಪಾಟೀಲ್, ಸಿದ್ದಪ್ಪ ಕೂಯಿಲೂರ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ, ಅಶೋಕ ನಾಯಕ, ಸುಭಾಷ ಯರಗೋಳ, ವೆಂಕಟರಾಮುಲು ಸೈದಾಪೂರ, ಸುರೇಶ ಬೆಳಗುಂದಿ, ಜರ್ನಾಧನ ಬಡಿಗೇರಾ, ಮಹೇಶ ಠಾಣಗುಂದಿ ಸೇರಿದಂತೆ ಕರವೇ ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.






