ಶಹಾಪುರ | ನಿರಾಶ್ರಿತರಿಗೆ ಅಗತ್ಯ ಸೌಲಭ್ಯಗಳಲ್ಲಿ ಕೊರತೆ ಆಗದಿರಲಿ: ಗುರುಪಾದ ತಳವಾರ

ಶಹಾಪುರ: ನಿರಾಶ್ರಿತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಯಾವುದೇ ಕೊರತೆಯಾಗದಂತೆ ಒದಗಿಸಿ, ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸಬೇಕು ಎಂದು ಶಹಾಪುರ ನಗರಸಭೆಯ ಅಭಿಯಾನ ವ್ಯವಸ್ಥಾಪಕ ಗುರುಪಾದ ತಳವಾರ ಸೂಚಿಸಿದರು.
ನಗರದ ವಸತಿ ರಹಿತರ ಆಶ್ರಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಶ್ರಯ ಕೇಂದ್ರದಲ್ಲಿ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ, ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಸೇರಿದಂತೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ನಿರಂತರ ಗಮನಹರಿಸಬೇಕು ಎಂದು ತಿಳಿಸಿದರು.
ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕರಾದ ಡಾ. ವಿಠೋಬ ಯಾದವ್ ಅವರು ಕೇಂದ್ರದಲ್ಲಿ ನಿರಾಶ್ರಿತರಿಗೆ ನೀಡಲಾಗುತ್ತಿರುವ ಸೇವೆಗಳು, ನಿರ್ವಹಣಾ ವ್ಯವಸ್ಥೆ ಹಾಗೂ ಲಭ್ಯವಿರುವ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದು, ಸೇವೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನೆ ವೇಳೆ ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್, ಆಹಾರ, ಹಾಸಿಗೆ ಹಾಗೂ ಬಟ್ಟೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಸ್ಥಿತಿಗತಿಯನ್ನು ಅಧಿಕಾರಿಗಳು ಪರಿಶೀಲಿಸಿದರು. ಮಹಿಳಾ ನಿರಾಶ್ರಿತರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ, ಸುರಕ್ಷಿತ ವಸತಿ ಹಾಗೂ ಕೇಂದ್ರದ ಸ್ವಚ್ಛತಾ ನಿರ್ವಹಣೆ ಕುರಿತು ಖಚಿತಪಡಿಸಿಕೊಂಡರು.
ಈ ಸಂದರ್ಭದಲ್ಲಿ ಆಶ್ರಯ ಕೇಂದ್ರದ ಕೇರ್ಟೇಕರ್ಗಳಾದ ಮಲ್ಲಪ್ಪ ಹಾಗೂ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.






