ಶಹಾಪುರ | ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದರೆ ಕಠಿಣ ಕ್ರಮ: ಶರಣಪ್ಪ ಸಲಾದಪುರ

ಶಹಾಪುರ : ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅಧಿಕೃತ ಆದೇಶ ಹೊರಡಿಸುವ ಮೂಲಕ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನಕ್ಕೆ ಮುನ್ನುಡಿ ಬರೆದಿದ್ದಾರೆ. ಇದರ ಭಾಗವಾಗಿ ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮ ಪಂಚಾಯಿತಿಯಲ್ಲಿ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ತಿಳಿಸಿದರು.
ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮದಲ್ಲಿ ಆಯೋಜಿಸಿದ್ದ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರತಿ ಗ್ರಾಮಗಳ ಕಿರಾಣಿ ಅಂಗಡಿ, ಪಾನ್ಶಾಪ್ಗಳಲ್ಲಿ ಅಕ್ರಮ ಮದ್ಯ ಮಾರಾಟ ಅತಿಯಾಗಿ ನಡೆಯುತ್ತಿದೆ. ಸುಲಭವಾಗಿ ಮದ್ಯ ದೊರಕುತ್ತಿರುವುದರಿಂದ ಸಮಾಜದಲ್ಲಿ ಕುಡುಕರ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಕುಟುಂಬಗಳ ಮನಶಾಂತಿ ಮತ್ತು ನೆಮ್ಮದಿ ಭಂಗವಾಗುತ್ತಿದೆ ಎಂದು ಅವರು ಹೇಳಿದರು.
ಹಳ್ಳಿಗಳಲ್ಲಿ ಸಿಗುವ ಮದ್ಯ ಅಸಲಿಯೇ ಅಥವಾ ನಕಲಿಯೇ ಎಂಬುದು ಗೊತ್ತಿಲ್ಲ. ಇದರಿಂದ ಮದ್ಯ ಸೇವಿಸುವ ವ್ಯಕ್ತಿಯ ಜೊತೆಗೆ ಆತನ ಕುಟುಂಬವೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದೆ. ಹೀಗಾಗಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಯಬೇಕು. ಇದಕ್ಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಗ್ರಾಮಗಳಲ್ಲಿ ಮದ್ಯ ಸೇವನೆಯಿಂದ ಅನೇಕ ಯುವಕರು ಚಿಕ್ಕ ವಯಸ್ಸಿನಲ್ಲೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪರವಾನಗಿ ಇರುವ ಸ್ಥಳಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡಲು ಯಾವುದೇ ಹಕ್ಕು ಬಾರ್ ಮಾಲೀಕರಿಗೆ ಇಲ್ಲ. ಇದನ್ನು ಉಲ್ಲಂಘಿಸಿದರೆ ಅಂತಹ ಬಾರ್ ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಮೇಲಾಧಿಕಾರಿಗಳಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.
ಮದ್ಯಪಾನ ಮುಕ್ತ ಗ್ರಾಮ ಅಭಿಯಾನಕ್ಕೆ ಸಹಕಾರ ನೀಡಿದ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ ಹಾಗೂ ಗ್ರಾಮ ಪಂಚಾಯತ್ ಮುಖಂಡರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಆರೋಗ್ಯವೇ ಪ್ರತಿಯೊಬ್ಬನಿಗೂ ಅತಿ ಮುಖ್ಯ. ಒಮ್ಮೆ ದುಶ್ಚಟಗಳಿಗೆ ಬಲಿಯಾದರೆ ಅದರಿಂದ ಹೊರಬರುವುದು ಕಷ್ಟಕರ. ಆದ್ದರಿಂದ ಯುವಕರು ಹಾಗೂ ಸಾರ್ವಜನಿಕರು ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮದ್ಯಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಪ್ರಜ್ಞಾವಂತರು ಹಾಗೂ ಮಹಿಳೆಯರು ಮದ್ಯಪಾನ ಮುಕ್ತ ಗ್ರಾಮ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಮದ್ಯವ್ಯಾಸನಿಗಳಿಗೆ ಜಿಲ್ಲಾ ಕೇಂದ್ರದಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಲು ಕೆಕೆಆರ್ಡಿಬಿ ಅನುದಾನದಲ್ಲಿ ಒಂದು ಕೋಟಿ ರೂ. ಒದಗಿಸಲಾಗುವುದು ಎಂದು ಸಚಿವರು ಘೋಷಿಸಿದರು.
ಈ ಸಂದರ್ಭದಲ್ಲಿ 2024–25ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಉಕ್ಕಿನಾಳ ಗ್ರಾಮದಿಂದ ಯಲ್ಲಮ್ಮ ಗುಡಿಗೆ ಹೋಗುವ ರಸ್ತೆ (ಯಡ್ರಾಮಿ ಗಡಿಭಾಗ), 2025–26ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಯೋಜನೆಯಡಿ ಉಕ್ಕಿನಾಳ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಮಾತನಾಡಿ, ಯಾದಗಿರಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನ ಜಾರಿಗೊಳಿಸಲಾಗುವುದು. ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಮದ್ಯ ಸೇವಿಸುವವರನ್ನು ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಿಳಿವಳಿಕೆ ನೀಡುವ ಮೂಲಕ ತಪ್ಪು ದಾರಿಗೆ ಹೋಗದಂತೆ ತಡೆಯಬೇಕು. ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಜನರು ಸ್ವಯಂಪ್ರೇರಿತರಾಗಿ ಕಡಿವಾಣ ಹಾಕಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಿಒ ಮಡಿವಾಳಪ್ಪ ಮುದ್ನೂರು, ಗ್ರಾಮ ಪಂಚಾಯತ್ ಅಧ್ಯಕ್ಷ ಗೇನುಸಿಂಗ್ ರಾಠೋಡ್ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.







