ಸುರಪುರ | ಶಾಸಕ ಆರ್.ವಿ ನಾಯಕರಿಂದ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಸುರಪುರ: ಮತಕ್ಷೇತ್ರದ ಹುಣಸಗಿ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ಕೆಲ ತಿಂಗಳ ಹಿಂದೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದ ಅಮರಣ್ಣ ತಳವಾರ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಬುಧವಾರ ತಮ್ಮ ಗೃಹ ಕಚೇರಿಯಲ್ಲಿ ಮೃತರ ಪತ್ನಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜಾ ವೇಣುಗೋಪಾಲ ನಾಯಕ, ರಾಜ್ಯ ಸರ್ಕಾರ ಜನಪರ ಯೋಜನೆಗಳ ಮೂಲಕ ಪ್ರತಿಯೊಂದು ಕುಟುಂಬಕ್ಕೂ ನೆರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಅನೇಕ ಕುಟುಂಬಗಳಿಗೆ ಆಸರೆಯಾಗಿವೆ ಎಂದು ಹೇಳಿದರು.
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಅಮರಣ್ಣ ತಳವಾರ ಅವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಮಂಜೂರಾಗಿದ್ದು, ಅದರ ಚೆಕ್ ಅನ್ನು ಇಂದು ಹಸ್ತಾಂತರಿಸಲಾಗಿದೆ. ಈ ಪರಿಹಾರದ ಮೊತ್ತವನ್ನು ಕುಟುಂಬದ ಭವಿಷ್ಯದ ಹಿತದೃಷ್ಟಿಯಿಂದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೃತರ ಕುಟುಂಬಕ್ಕೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್, ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.




