ಸುರಪುರ | ಸಂಚಾರಿ ಪೊಲೀಸ್ ಠಾಣೆಗಾಗಿ ಶಾಸಕರಿಗೆ ಮನವಿ

ಸುರಪುರ: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸಂಚಾರಿ ಪೊಲೀಸ್ ಠಾಣೆ ಆರಂಭಿಸುವಂತೆ ರುಕ್ಮಾಪುರ ಗ್ರಾಮ ನಿವಾಸಿಗಳ ಸಂಘದ ಕಾರ್ಯಾಧ್ಯಕ್ಷ ಹಾಗೂ ನಿವೃತ್ತ ಎಸ್.ಪಿ ಚಂದ್ರಕಾಂತ ಭಂಡಾರೆ ಅವರು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಿಗೆ ಮನವಿ ಸಲ್ಲಿಸಿದರು.
ನಗರದ ಶಾಸಕರ ಕಚೇರಿಯಲ್ಲಿ ಭೇಟಿ ನೀಡಿ ಮಾತನಾಡಿದ ಅವರು, ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಬೈಕ್ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ಮನವಿ ಸ್ವೀಕರಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಸಕಾರಾತ್ಮಕವಾಗಿ ಸ್ಪಂದಿಸಿ, ವಿಷಯವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ರುಕ್ಮಾಪುರ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಗಮಕ ಸಮ್ಮೇಳನ ಆಯೋಜಿಸಲು ಕೆಕೆಆರ್ಡಿಬಿ ಅನುದಾನಕ್ಕಾಗಿ ಶಿಫಾರಸು ಮಾಡುವಂತೆ ಜಿಲ್ಲಾ ಗಮಕ ಕಲಾ ಪರಿಷತ್ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಹಾಗೂ ಕಾರ್ಯಾಧ್ಯಕ್ಷ ಚಂದ್ರಕಾಂತ ಭಂಡಾರೆ ಮನವಿ ಸಲ್ಲಿಸಿದರು.




