ಸುರಪುರ | ಸಹಕಾರ ರಂಗದಲ್ಲಿ ಯುವಜನತೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು : ವಿರುಪಾಕ್ಷಿ
ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಕುರಿತು ಕ್ಲಸ್ಟರ್ ತರಬೇತಿ ಕಾರ್ಯಕ್ರಮ

ಸುರಪುರ : ಸಹಕಾರ ಕ್ಷೇತ್ರದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಯುವಕರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಪ್ರಭು ಮಹಾವಿದ್ಯಾಲಯದ ಪ್ರಾಂಶುಪಾಲ ವಿರುಪಾಕ್ಷಿ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಶ್ರೀ ಪ್ರಭು ಪದವಿ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸಹಕಾರ ಕ್ಷೇತ್ರದಲ್ಲಿ ಯುವಜನತೆಯ ಪಾತ್ರ’ ವಿಷಯದ ಕ್ಲಸ್ಟರ್ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಹಕಾರ ರಂಗದಲ್ಲಿ ಯುವಕರ ಪಾಲ್ಗೊಳ್ಳುವಿಕೆ ಹೆಚ್ಚಿದರೆ ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ ಉದ್ಯೋಗಾವಕಾಶಗಳಿಗೂ ದಾರಿ ತೆರೆದುಕೊಳ್ಳುತ್ತದೆ. ವಿದ್ಯಾರ್ಥಿಗಳು ಸ್ಥಳೀಯ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಪಡೆದು ಸಹಕಾರ ಚಳವಳಿಯ ಭಾಗವಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಸಾಯಿಬಣ್ಣ ಮುಡಬೂಳ ಮಾತನಾಡಿ, ಕೃಷಿ, ಕೌಶಲ್ಯಾಭಿವೃದ್ಧಿ, ಸಣ್ಣ ಕೈಗಾರಿಕೆ, ವ್ಯಾಪಾರ ಮತ್ತು ಉದ್ಯಮಗಳ ಬೆಳವಣಿಗೆಯಲ್ಲಿ ಸಹಕಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಮೂಲಕ ಸಹಕಾರ ವ್ಯವಸ್ಥೆಯ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಮಠ ಅವರು ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ಅವರು ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ನಿಂಗಯ್ಯ ಪೂಜಾರಿ, ರಮೇಶ್ ಶಹಾಪುರಕರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಲ್ಲಾರಾವ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






