ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ಸಹಕಾರಿ : ಸಚಿವ ಶರಣಬಸಪ್ಪ ದರ್ಶನಾಪುರ

ಯಾದಗಿರಿ: ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.
ನಗರದ ಎಸ್.ಡಿ.ಎನ್ ರೆಸಿಡೆನ್ಸಿಯಲ್ಲಿ ಇಂದು ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್ ಇಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿದಲ್ಲಿ ಆರ್ಥಿಕ ವೃದ್ಧಿ ಜೊತೆಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಸಾಧ್ಯವಿದೆ. ಈ ದಿಸೆಯಲ್ಲಿ ರಾಜ್ಯದ ಸಣ್ಣ ಉದ್ದಿಮೆದಾರರನ್ನು ತೊಂದರೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ವಿಶೇಷ ಗಮನ ನೀಡುತ್ತಿದೆ ಎಂದು ಹೇಳಿದರು.
ಎಮ್ ಎಸ್ ಎಮ್ ಇ( micro and small and medium enterprises) ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಶಿಯಾದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ನಿರ್ಣಯ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.
ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್, ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕೆ ಸಂಸ್ಥೆ ಅಧ್ಯಕ್ಷ ದಿನೇಶ್ ಕುಮಾರ್ ಜೈನ್ ಮಾತನಾಡಿದರು.
ರೈಸ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಹನುಮದಾಸ್ ಮುಂದಡಾ, ಸುರಪುರ ಕೈಗಾರಿಕೆ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಜೆಟ್ಟಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸತೀಶ್ ಕುಮಾರ್, ಕಾರ್ಯದರ್ಶಿ ಗುರು ಮಣಿಕಂಠ, ವಿಟಿಪಿಸಿ ಸಹಾಯಕ ನಿರ್ದೇಶಕ ಜಾಫರ್ ಅನ್ಸಾರಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಕುಲಶೇಖರನ್ ಉಪಸ್ಥಿತರಿದ್ದರು.
ಈ ವೇಳೆ ರಿಪೋರ್ಟ್ ಆನ್ ಕರ್ನಾಟಕ ಎಕ್ಸ್ ಪೋರ್ಟ್ ಪುಸ್ತಕವನ್ನು ಸಚಿವರು ಬಿಡುಗಡೆಗೊಳಿಸಿದರು. ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ್ ಸ್ವಾಗತಿಸಿದರು.







