ವಡಗೇರಾ | ಎಸ್ಐಆರ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಶಶಿಧರ ಹಿರೇಮಠ

ವಡಗೇರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭಗೊಂಡಿದ್ದು, ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡುವ ವೇಳೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಹೊಸ ಬಸ್ ನಿಲ್ದಾಣದವರೆಗೆ ಆಯೋಜಿಸಿದ್ದ ಎಸ್ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.
ಅರ್ಹ ನಾಗರಿಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದೇ ಎಸ್ಐಆರ್ನ ಮುಖ್ಯ ಉದ್ದೇಶವಾಗಿದೆ. ಜುಲೈ 29ರವರೆಗೆ ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಮತದಾರರು ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಮಂಗಳ ಮಾತನಾಡಿ, ಮತದಾರರ ಪಟ್ಟಿಯಲ್ಲಿನ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವುದು ಸೇರಿದಂತೆ ಒಂದೇ ವ್ಯಕ್ತಿಯ ಹೆಸರು ಒಂದಕ್ಕಿಂತ ಹೆಚ್ಚು ಕಡೆ ಇದ್ದರೆ ಅದನ್ನು ಸರಿಪಡಿಸುವ ಪ್ರಕ್ರಿಯೆಯೂ ಇದೇ ಅವಧಿಯಲ್ಲಿ ನಡೆಯಲಿದೆ ಎಂದರು.
ಮತದಾರರ ಗುರುತಿನ ಚೀಟಿಯಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಸಹ ಅವಕಾಶವಿದೆ. ಸರ್ಕಾರದ ನಿರ್ದೇಶನದಂತೆ ಪ್ರತಿಯೊಬ್ಬ ನಾಗರಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಬಿಎಲ್ಒಗಳು ಮನೆಗೆ ಭೇಟಿ ನೀಡುವ ವೇಳೆ ಮನೆಯವರು ಲಭ್ಯವಿಲ್ಲದಿದ್ದರೆ, ವಿಶೇಷವಾಗಿ ರೈತರು ಹೊಲದ ಕೆಲಸಕ್ಕೆ ತೆರಳಿದ್ದರೆ, ನಂತರದ ದಿನ ಬಿಎಲ್ಒಗಳನ್ನು ಸಂಪರ್ಕಿಸಿ ದಾಖಲೆಗಳನ್ನು ಸಲ್ಲಿಸಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಹಶೀಲ್ದಾರ್ ತಿಳಿಸಿದರು.
ಈ ವೇಳೆ ಸಹಾಯಕ ನಿರ್ದೇಶಕರು ಕಿರಾಣಬಾಬು, ಸಹಾಯಕ ಲೆಕ್ಕಧಿಕಾರಿ ಶರಣಬಸವ, ಪಿಡಿಒ ಸಿದ್ದವಿರಪ್ಪ, ಬಿ ಆರ್ ಪಾಟೀಲ್, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್ ತಾಲ್ಲೂಕು ಪಂಚಾಯತಿ, ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು & ವಿಬಿ-ಜಿ ರಾಮ ಜಿ ಯೋಜನೆಯ ಸಿಬ್ಬಂದಿಗಳು ಮತ್ತು ತಾಲ್ಲೂಕಿನ ನಾಗರಿಕರು ಭಾಗವಹಿಸಿದರು.






