ವಡಿಗೇರಾ | ಗ್ರಾಮೀಣ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಒದಗಿಸಲು ಆದ್ಯತೆ ನೀಡಿ: ಕಿರಣಬಾಬು

ವಡಿಗೇರಾ: ಗ್ರಾಮೀಣ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಕಸಿತ ಭಾರತ ಫಾರ್ ಗ್ಯಾರಂಟಿ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ (ವಿ.ಬಿ.-ಜಿ ರಾಮ್-ಜಿ) ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಗ್ರಾಮೀಣರಿಗೆ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಕಿರಣಬಾಬು ಹೇಳಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ 1ರಿಂದ ಯೋಜನೆ ಜಾರಿಯಾಗಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.
ಈ ಯೋಜನೆಯಡಿ ದಿನಗೂಲಿ ಮೊತ್ತವನ್ನು 382 ರೂ. ಗೆ ಹಾಗೂ ವಾರ್ಷಿಕ ಮಾನವ ದಿನಗಳನ್ನು 125ಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ 318 ವಿಧದ ಕಾಮಗಾರಿಗಳನ್ನು ಯೋಜನೆಯಡಿ ಸೇರಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಹೇಳಿದರು.
ನಾಮಕವಸ್ತುವಿನಂತೆ ಕೆಲಸ ಮಾಡದೇ, ಪ್ರತಿಯೊಬ್ಬ ಅಧಿಕಾರಿಯೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇ-ಕೆವೈಸಿಯನ್ನು ಶೇ.100ರಷ್ಟು ಪೂರ್ಣಗೊಳಿಸುವುದು, ಪ್ರತಿದಿನ ಎನ್ಎಂಆರ್ ದಾಖಲಿಸುವುದು, ಕ್ರಿಯಾ ಯೋಜನೆ ರೂಪಿಸಿ ಕೆಲಸದ ಹಂಚಿಕೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಮಳೆಯ ಕೊರತೆಯಿಂದ ಗ್ರಾಮೀಣರು ವಲಸೆ ಹೋಗದಂತೆ ತಡೆಯಲು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಕಾಮಗಾರಿಗಳನ್ನು ಆರಂಭಿಸಬೇಕು. ನಿಯಮಾನುಸಾರ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಜನರಿಂದ ಕೆಲಸಕ್ಕೆ ಬೇಡಿಕೆ ಅರ್ಜಿಗಳನ್ನು ಸ್ವೀಕರಿಸುವಂತೆ ಗ್ರಾಮ ಕಾಯಕ ಮಿತ್ರರು ಹಾಗೂ ಬಿಎಫ್ಟಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಂಐಎಸ್ ಮಲ್ಲಿಕಾರ್ಜುನ, ಎಡಿಎಮ್ ದೇವಮ್ಮ, ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.






