ಯಾದಗಿರಿ | ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ : ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಯಾದಗಿರಿ: ಗುರುಮಠಕಲ್ ತಾಲೂಕಿನ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ನಿಲಯದಲ್ಲಿ ಸ್ವಾತಿ (21) ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಕುರಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಣ್ಣ ಎಂ. ಗೋನಾಲ ಗಂಭೀರ ಆರೋಪ ವ್ಯಕ್ತಪಡಿಸಿ, ಹಾಸ್ಟೆಲ್ನ ಅವ್ಯವಸ್ಥೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಹೇಳಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಗಂಭೀರ ಅವ್ಯವಸ್ಥೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಶಹಾಪುರ ಹಾಗೂ ಗುರುಮಿಠಕಲ್ ಭಾಗಗಳಲ್ಲಿ ಇಂತಹ ಘಟನೆಗಳು ಈ ಹಿಂದೆ ಕೂಡ ನಡೆದಿವೆ. ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸದಿರುವುದು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಕೆಲ ಹಾಸ್ಟೆಲ್ಗಳಲ್ಲಿ ಸಿಬ್ಬಂದಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಕಾಳಜಿ ತೋರಿಸುತ್ತಿಲ್ಲ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳ ಕಡೆ ಗಮನ ಹರಿಸಲಾಗುತ್ತಿಲ್ಲ ಎಂದು ದೂರಿದರು.
ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಬಯೋಮೆಟ್ರಿಕ್ ಹಾಜರಾತಿ ನಿಯಮಗಳ ಉಲ್ಲಂಘನೆ ಹಾಗೂ ಆಹಾರ ಧಾನ್ಯ ಪೂರೈಕೆಯಲ್ಲಿ ಅಕ್ರಮ ಸೇರಿದಂತೆ ಹಲವು ಸಮಸ್ಯೆಗಳು ಇರುವುದಾಗಿ ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಪ್ರತ್ಯೇಕ ತನಿಖಾ ತಂಡ ರಚಿಸಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಒಂದು ವಾರದೊಳಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರಾಮಪ್ಪ ಕೋರೆ, ನಾಗು ಗೋಗಿಕರ್, ಭೀಮಣ್ಣ ಅಡೊಡಗಿ ಇದ್ದರು.






