ಯಾದಗಿರಿ | ಮಹಿಳಾ ಸಾಧನೆಗೆ ಸ್ಫೂರ್ತಿದಾಯಕ ದಿನ ಮಹಿಳಾ ದಿನಾಚರಣೆ: ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧನೆ ಮಾಡಿದ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ಫೂರ್ತಿದಾಯಕ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ, ಮಿಷನ್ ಶಕ್ತಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣ ಹಾಗೂ ಮಹಿಳಾ ಸಾಧಕರನ್ನು ಸ್ಮರಿಸುವ ಮತ್ತು ಅವರಿಂದ ಸ್ಫೂರ್ತಿ ಪಡೆಯುವ ದಿನ ಇದಾಗಿದೆ. ಮಹಿಳೆಯರ ಸಾಧನೆ, ಕರ್ತವ್ಯ ಮತ್ತು ಮಹಿಳೆಯರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಕುರಿತು ಚಿಂತನೆ ಮಾಡುವ ಸಂದರ್ಭವೂ ಇದೇ ಎಂದು ಹೇಳಿದರು.
ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಹಿಳಾ ಸಬಲೀಕರಣದ ಪ್ರತೀಕವಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಮಾತನಾಡಿ, ಯಾದಗಿರಿ ಜಿಲ್ಲೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಿಂದುಳಿದಿದೆ ಎಂಬ ಮನೋಭಾವನೆ ಇದ್ದರೂ ಈಗ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಜಿಲ್ಲೆಯ ನಾಲ್ವರು ಸಾಧನೆ ಮಾಡಿದ್ದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದರು. ವಿಶೇಷವಾಗಿ ಜಿಲ್ಲೆಯವರಾದ ನಿವೇದಿತಾ ಭಾವಿಮಣಿ ಅವರು ಪಿಡಿಓ ಮಗಳಾಗಿ UPSC ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾತನಾಡಿ, ಕುಟುಂಬ ಮತ್ತು ದೇಶದ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ. ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಶಕ್ತಗೊಳಿಸಿದರೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಹೇಳಿದರು.
ನಾಗರಿಕ ಸೇವಾ ಪರೀಕ್ಷೆಯಲ್ಲಿ ಸಾಧನೆಗೈದ ಡಾ. ನಿವೇದಿತಾ ಭಾವಿಮನಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ವಿಶ್ವವನ್ನೇ ಬದಲಿಸುವ ಶಕ್ತಿ ಹೊಂದಿದ್ದಾರೆ. ಹೆಣ್ಣು ಮಕ್ಕಳು ವಿದ್ಯಾವಂತರಾಗಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಹಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ.ಶಂಕ್ರಮ್ಮ ಪಾಟೀಲ್ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಉಪಸ್ಥಿತರಿದ್ದರು. ಕವಿತಾ ಪತ್ತಾರ ಪ್ರಾರ್ಥಿಸಿದರು.
ಸರ್ಕಾರಿ ಮಹಿಳಾ ನೌಕರರ ಸಂಘ ಜಿಲ್ಲಾ ಅಧ್ಯಕ್ಷ ಚಂದ್ರಕಲಾ ಗೂಗಲ್ ಉಪಸ್ಥಿತರಿದ್ದರು. ನೂತನವಾಗಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ವಿವಿಧ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಲಾಪ್ರಕಾರಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.







