ಯಾದಗಿರಿ | ಹಳ್ಳದ ಬ್ರಿಜ್ ಸೇತುವೆ ಅಗಲೀಕರಣಕ್ಕೆ ಸಮತಾ ಸೈನಿಕ ದಳ ಆಗ್ರಹ

ಯಾದಗಿರಿ: ಬೀದರ್-ಬೆಂಗಳೂರು ರಾಜ್ಯ ಹೆದ್ದಾರಿಯ ಹತ್ತಿಗೂಡೂರು ಗ್ರಾಮದ ಹಳ್ಳದ ಬ್ರಿಜ್ ಸೇತುವೆ ಇಕ್ಕಟ್ಟಾಗಿರುವುದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಸೇತುವೆಯನ್ನು ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಹತ್ತಿಗೂಡೂರು ಶರಣರೆಡ್ಡಿ ಒತ್ತಾಯಿಸಿದ್ದಾರೆ.
ಶಹಾಪುರ ತಾಲ್ಲೂಕಿನ ಹತ್ತಿಗೂಡೂರು ಮಾರ್ಗವು ಬೆಂಗಳೂರು ಸೇರಿದಂತೆ ನೆರೆಯ ಜಿಲ್ಲೆಗಳು ಹಾಗೂ ಪಕ್ಕದ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಹಳ್ಳದ ಬ್ರಿಜ್ ಸೇತುವೆ ಕಿರಿದಾಗಿರುವ ಕಾರಣ ಎದುರುಬದುರಾಗಿ ಬರುವ ವಾಹನಗಳು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಸೇತುವೆ ಮೇಲೆ ವಾಹನಗಳು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿ ಹಲವು ಬಾರಿ ಮುಖಾಮುಖಿ ಢಿಕ್ಕಿ ಸಂಭವಿಸಿ ಅಪಘಾತಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ.
ಸೆ.1ರಂದು ನಾಲ್ಕು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಪ್ರಯಾಣಿಕರು ಹಾಗೂ ಸ್ಥಳೀಯ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸಿದರು. ಕೆಲವರು ವಾಹನಗಳಿಂದ ಇಳಿದು ಹಲವು ಕಿ.ಮೀ. ನಡೆದುಕೊಂಡು ಹೋಗುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಇಂತಹ ಘಟನೆಗಳು ಪದೇಪದೆ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಶ್ವತ ಪರಿಹಾರಕ್ಕೆ ಮುಂದಾಗದಿರುವುದು ಬೇಸರದ ಸಂಗತಿ ಎಂದು ಶರಣರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೇತುವೆ ಬಳಿ ಅಧಿಕಾರಿಗಳು ಕೇವಲ ಸ್ಪೀಡ್ ಬ್ರೇಕರ್ ಅಳವಡಿಸಿ ಕೈತೊಳೆದುಕೊಂಡಿದ್ದಾರೆ. ರಾತ್ರಿ ವೇಳೆ ಸ್ಪೀಡ್ ಬ್ರೇಕರ್ ಸರಿಯಾಗಿ ಕಾಣಿಸದಿರುವುದರಿಂದ ದ್ವಿಚಕ್ರ ವಾಹನ ಹಾಗೂ ಸಣ್ಣ ಕಾರುಗಳ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಹಲವರು ಗಾಯಗೊಂಡು ಕೈಕಾಲು ಮುರಿದುಕೊಂಡಿರುವ ಘಟನೆಗಳು ನಡೆದಿವೆ. ಹೀಗಾಗಿ ಕೇವಲ ಸ್ಪೀಡ್ ಬ್ರೇಕರ್ ಅಳವಡಿಸುವ ಬದಲು ಸೇತುವೆಯನ್ನು ವೈಜ್ಞಾನಿಕವಾಗಿ ಅಗಲೀಕರಣಗೊಳಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಳ್ಳದ ಬ್ರಿಜ್ ಸೇತುವೆ ಅಗಲೀಕರಣಕ್ಕೆ ತಕ್ಷಣ ಕ್ರಮ ಕೈಗೊಂಡು, ಅಪಘಾತ ಹಾಗೂ ನಿತ್ಯದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ವಾಹನ ಸವಾರರು ಮತ್ತು ಗ್ರಾಮಸ್ಥರನ್ನು ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.






