ಯಾದಗಿರಿ | ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ, ಮುಖ್ಯವಾಹಿನಿಗೆ ತನ್ನಿ; ಶಶಿಧರ್ ಕೋಸಂಬೆ

ಯಾದಗಿರಿ : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು "ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ" ಶೀರ್ಷಿಕೆಯಡಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ʼಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ- 2009 ಕುರಿತ ಪ್ರಗತಿ ಪರಿಶೀಲನಾ ಸಭೆʼಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವ ಜವಾಬ್ದಾರಿ ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲಿದೆ. ಜಿಲ್ಲೆಯ ಸುಮಾರು 54,481 ಮಕ್ಕಳ ಆಧಾರ್ ಮೌಲ್ಯೀಕರಣ ಆಗಬೇಕಾಗಿದ್ದು, ಶಿಕ್ಷಣ ಇಲಾಖೆಯ ಆಯುಕ್ತರ ನಿರ್ದೇಶನದ ಮೇರೆಗೆ ಒಂದು ವಾರದಲ್ಲಿ ಇದನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಇನ್ನೂವರೆಗೆ ಈ ಕಾರ್ಯ ಆಗದೇ ಇರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಕುರಿತು ಆಯೋಗ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು.
ಬಡ ಮಕ್ಕಳು ಸರಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಬಾರದು. ಶಿಶ್ಯವೇತನ, ಶೈಕ್ಷಣಿಕ ಸೌಲಭ್ಯಗಳು ಅವರಿಗೆ ಸಕಾಲಕ್ಕೆ ದೊರಕಿಸುವ ಸದುದ್ದೇಶವನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೊಂದಿದೆ. ಈ ಹಿನ್ನೆಲೆಯಲ್ಲಿ ಆಧಾರ ಪರಿಶೀಲಿಸಿ ಸರಿಪಡಿಸುವ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಸ್ಯಾಟ್ಸ(SATS) ಅಪಾರ(APAAR) ತಂತ್ರಾಂಶಗಳ ಬಗ್ಗೆ ಈಗಾಗಲೇ ಗೂಗಲ್ ಮತ್ತು ಭೌತಿಕ ತರಬೇತಿಗಳನ್ನು ಸಹ ನೀಡಲಾಗಿದೆ. ಕಾರಣ ಆಧಾರ್ ಸರಿಪಡಿಸುವ ಜೊತೆಗೆ ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಿ ಮುಖ್ಯವಾಹಿನಿಗೆ ತರುವಂತೆ ಅವರು ಸೂಚಿಸಿದರು.
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ -2016ರ ಅನ್ವಯ ಸಕಲ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳ ಸುರಕ್ಷಾ ಸಮಿತಿಗಳನ್ನು ರಚಿಸಬೇಕು. ಕಡ್ಡಾಯವಾಗಿ ಸಲಹಾ ಪೆಟ್ಟಿಗೆ ಇಡಬೇಕು. ಕಾಲಕಾಲಕ್ಕೆ ಬಿಸಿಊಟ ಸಮಸ್ಯೆಗಳನ್ನು ಬಗೆಹರಿಸಬೇಕು. ಮಕ್ಕಳಿಗೆ ಸಮರ್ಪಕ ಆಹಾರ ಪೂರೈಕೆ ಆಗದಿದ್ದಲ್ಲಿ, ಆಹಾರ ಭದ್ರತಾ ಕಾಯ್ದೆಯ ಉಲ್ಲಂಘನೆ ಎಂದು ಪರಿಗಣಿಸಲಾಗುವುದು.
ಪದೇ ಪದೇ ಲೋಪ ಸಂದರ್ಭದಲ್ಲಿ ಸೊಮೋಟೊ ಪ್ರಕರಣ ದಾಖಲೆಗೂ ಕ್ರಮ ಕೈಗೊಳ್ಳಲಾಗುವುದು. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯ್ದೆ- 2009 ರನ್ವಯ ಕ್ರಮ ಕೈಗೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಸಂಬಂಧ ಪಟ್ಟವರ ವಿರುದ್ಧ ಬೆಂಗಳೂರಿಗೆ ಕರೆದು ಆಯೋಗದ ಮುಂದೆ ವಿಚಾರಣೆಗೆ ಒಳಪಡಿಸಲಾಗುವುದು. ವಿಶೇಷ ಸಂದರ್ಭದಲ್ಲಿ ಅಮಾನತ್ತಿನಂತಹ ಮತ್ತು ಇನ್ಕ್ರಿಮೆಂಟ್ ತಡೆ ಹಿಡಿಯುವಂತಹ ಕ್ರಮದ ಬಗ್ಗೆಯೂ ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ತಿಳಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಕಡ್ಡಾಯವಾಗಿ ಅಭ್ಯರ್ಥಿಗಳ ಪೊಲೀಸ್ ವೆರಿಫಿಕೇಶನ್ ಆಗಿರಬೇಕು. ಶಾಲೆಗಳಲ್ಲಿ ಕಡ್ಡಾಯವಾಗಿ ಬದ್ಧತಾ ಪ್ರಮಾಣ ಪತ್ರವನ್ನು ಪಡೆಯಲು ಸೂಚಿಸಿದ ಅವರು, ಜಿಲ್ಲಾ ಮಟ್ಟದಿಂದ ತಾಲೂಕು ಹಾಗೂ ಗ್ರಾಮ ಮಟ್ಟದವರೆಗಿನ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
ಮಕ್ಕಳ ಭವಿಷ್ಯವನ್ನು ರೂಪಿಸುವಂತಹ ಜವಾಬ್ದಾರಿ ಹೊಂದಿದ ಇಲಾಖೆ ಇದಾಗಿರುವುದರಿಂದ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಿ.ಆರ್.ಪಿ.ಸಿ.ಆರ್.ಪಿ, ಶಿಕ್ಷಣ ಸಮನ್ವಯಾಧಿಕಾರಿಗಳು ಹಾಗೂ ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಮಕ್ಕಳ ಸಮಸ್ಯೆಗಳನ್ನು ಆದ್ಯತೆ ಮೇಲೆ ಪರಿಹರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅವರು ಜಿಲ್ಲೆಯ ವಿವಿಧ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಕೊರತೆ, ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇನ್ನಿತರ ಕುಂದುಕೊರತೆಗಳ ಬಗ್ಗೆ ಅವಶ್ಯಕ ಮಾಹಿತಿಯನ್ನು ಪಡೆದರು.
ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಚನ್ನಬಸಪ್ಪ ಮುಧೋಳ ಅವರು ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗಕ್ಕೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತುನಿಷ್ಠ ವರದಿಗಳನ್ನು ಸಲ್ಲಿಸಬೇಕು. ಯಾವುದೇ ರೀತಿಯ ಸಬೂಬು ಹೇಳದೆ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವಂತೆ ಸೂಚನೆ ನೀಡಿದರು.
ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ ಸಿಪಿಐ ವಿಜಯಕುಮಾರ್ ಅವರು ಉಪಸ್ಥಿತರಿದ್ದರು.







