Yadagiri | ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಬೀಗ ಹಾಕಲು ರೈತ ಸಂಘದಿಂದ ಯತ್ನ

ಯಾದಗಿರಿ, ಸೆ.19: ತಾಲೂಕಿನ ಮಲ್ಕಪ್ಪನಹಳ್ಳಿ ಹಾಗೂ ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ಗ್ರಾಮಗಳ ಕೆರೆಗಳನ್ನು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಸರಪಳಿಯಿಂದ ಬೀಗ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಾಗೂ ಸಂಘಟನೆಯ ಮುಖಂಡರು ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಬೇಡಿಕೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಖಂಡರೊಬ್ಬರು ಸರಪಳಿ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದರು.
ಈ ವೇಳೆ ರೈತ ಮುಖಂಡರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ನೀರಿಲ್ಲದೆ ಬೆಳೆಗಳು ಒಣಗುತ್ತಿವೆ, ಜಾನುವಾರುಗಳು ಸಾವನ್ನಪ್ಪುತ್ತಿವೆ. ರೈತರ ಬೆಳೆಗಳನ್ನು ಉಳಿಸಲು ತಕ್ಷಣ ನೀರು ಹರಿಸಬೇಕು” ಎಂದು ಆಗ್ರಹಿಸಿದರು.
ರೈತ ಸಂಘದ ಮುಖಂಡರು ಮಾತನಾಡಿ, ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕಾಗಿ ಹೋರಾಟ ನಡೆಸಿದ್ದ ರೈತರು ಈಗ ಬೆಳೆ ಉಳಿಸಿಕೊಳ್ಳಲು ನೀರಿಗಾಗಿ ಹೋರಾಡುವ ಪರಿಸ್ಥಿತಿ ಬಂದಿದೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ನೀರಿದ್ದು, ಸನ್ನತಿ ಬ್ಯಾರೇಜ್ನಿಂದ ಕನಿಷ್ಠ 0.2 ಟಿಎಂಸಿ ನೀರು ಬಿಡುಗಡೆ ಮಾಡಿದರೆ ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನ ಸುಮಾರು 35 ಕೆರೆಗಳು ತುಂಬುತ್ತವೆ ಎಂದು ತಿಳಿಸಿದರು.
ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಅವರೊಂದಿಗೆ ಆಗಮಿಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ರೈತರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು.
ಸನ್ನತಿ ಬ್ಯಾರೇಜ್ನ ಒಟ್ಟು ಸಾಮರ್ಥ್ಯ 2 ಟಿಎಂಸಿ ಆಗಿದ್ದು, ಪ್ರಸ್ತುತ 1.4 ಟಿಎಂಸಿ ನೀರು ಲಭ್ಯವಿದೆ. ಯಾದಗಿರಿ ಬ್ಯಾರೇಜ್ನಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಯಾದಗಿರಿ, ಶಹಾಪುರ ನಗರಗಳು, ಗುರುಮಠಕಲ್ ಪಟ್ಟಣ ಸೇರಿದಂತೆ 36 ಗ್ರಾಮಗಳಿಗೆ ಕುಡಿಯುವ ನೀರು ಸನ್ನತಿ ಬ್ಯಾರೇಜ್ನಿಂದ ಪೂರೈಕೆಯಾಗುತ್ತಿದ್ದು, ಜಿಲ್ಲೆಯ ಸುಮಾರು 35 ಶೇಕಡಾ ಕುಡಿಯುವ ನೀರಿನ ಅವಲಂಬನೆ ಇದೇ ಬ್ಯಾರೇಜ್ ಮೇಲಿರುವುದರಿಂದ ಜುಲೈ ಅಂತ್ಯದವರೆಗೆ ಕುಡಿಯುವ ನೀರು ಪೂರೈಕೆಯನ್ನು ಗಮನದಲ್ಲಿಟ್ಟುಕೊಂಡು ನೀರಿನ ನಿರ್ವಹಣೆ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರತಿಭಟನೆಯಲ್ಲಿ ಮಹೇಶ್ ಗೌಡ ಸುಬೇದಾರ್, ವಿಜಯಕುಮಾರ್ ಮೂಷ್ಟುರು, ಮೌನೇಶ ಸಗರ್, ರಾಕೇಶ್ ಗೌಡ ಕಪೂರ್, ಈಶಪ್ಪ ಹೂಗಾರ, ಭೀಮರಾಯ ಕಪೂರ್ ಸೇರಿದಂತೆ ಹಲವರು ಭಾಗವಹಿಸಿದ್ದರು.






