ಯಾದಗಿರಿ | ಜನನ, ಮರಣ ನೋಂದಣಿ ಶೇ.100ರಷ್ಟು ಮಾಡಲು ಜಿಲ್ಲಾಧಿಕಾರಿಗಳಿಂದ ಸೂಚನೆ

ಯಾದಗಿರಿ: ಜಿಲ್ಲೆಯಲ್ಲಿನ ಜನನ, ಮರಣಗಳ ನೋಂದಣಿಯನ್ನು ಶೇ.100ರಷ್ಟು ಆಗುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಜನನ, ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ, ಮರಣ ಘಟನೆಗಳ ಕುರಿತು ನಿಗಧಿತ ಸಮಯದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ಎಂಟ್ರಿ ಮಾಡಲು ಕ್ರಮ ಕೈಗೊಳ್ಳಬೇಕು. ಮರಣಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಹಾಗೂ ಮರಣೋತ್ತರ ಪರೀಕ್ಷೆ ವರದಿ ಸಂಬಂಧಿಸಿದ ನೋಂದಣಾಧಿಕಾರಿಗಳಿಗೆ ತಪ್ಪದೇ ಸಲ್ಲಿಸುವಂತೆ ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಜರುಗುವ ಜನನ, ಮರಣ ನೋಂದಣಿ ಕುರಿತು ಮಾಹಿತಿದಾರರಾದ ಅಂಗನವಾಡಿ ಕಾರ್ಯಕರ್ತೆಯರು, ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳಿಗೆ ಮಾಹಿತಿ ಒದಗಿಸುವಂತೆ ನೋಡಿಕೊಳ್ಳಬೇಕು. ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಅವಶ್ಯಕತೆಗಳಲ್ಲಿ ಸೂಕ್ತ ಜಾಗೃತಿ ಮೂಡಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜರಗುವ ಜನನ, ಮರಣಗಳ ಬಗ್ಗೆ ನೋಂದಣಿ ಆಗುವಂತೆ ನೋಡಿಕೊಳ್ಳಲು ಸೂಚಿಸಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳಾಗಿ ನೇಮಿಸಲಾಗಿದೆ. ನಗರಪ್ರದೇಶಗಳಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕರು, ನೋಂದಣಾಧಿಕಾರಿಗಳಾಗಿರುತ್ತಾರೆ. ಜನನ, ಮರಣ ಘಟಿಸಿದ 21ದಿನಗಳರೊಳಗೆ ನೋಂದಣಿ ಉಚಿತವಾಗಿರುತ್ತದೆ. 22ರಿಂದ 30ದಿನಗಳರೊಳಗೆ ನೋಂದಣಿಗೆ 20 ರೂ. ಇದೆ, ಜನನ ಮರಣ ಘಟಿಸಿದ 31ರಿಂದ 365 ದಿನಗಳರೊಳಗೆ ನೋಂದಣಿಗೆ(ಸಕ್ಷಮ ಪ್ರಾಧಿಕಾರದ ಅನುಮತಿ ನಂತರ) 50 ರೂ. ಶುಲ್ಕವಿದ್ದು, ಜನನ, ಮರಣ ಘಟಿಸಿದ 365 ದಿನಗಳ ನಂತರ(ಜೆ ಎಮ್.ಎಫ್.ಸಿ ನ್ಯಾಯಾಲಯದ ಆದೇಶದ ನಂತರ) ನೋಂದಣಿಗೆ ಅವಕಾಶವಿದ್ದು, ಜನನ,ಮರಣದ ಹೆಚ್ಚುವರಿ ಪ್ರತಿಗಾಗಿ 50 ರೂ. ಇದೆ. ಈ ಕುರಿತು ಸಾರ್ವಜನಿಕರಿಗೆ ತಿಳಿಹೇಳಲು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ನಾಗರಾಜ ಅವರು ಸಮಗ್ರ ಮಾಹಿತಿ ನೀಡಿದರು. ಜಿ.ಪಂ ಸಿಇಓ ಲವೀಶ್ ಒರಡಿಯಾ, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ, ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಪ್ರಶಾಂತ ಕುಮಾರ್, ಸಹಾಯಕ ಸಾಂಖ್ಯಿಕ ಅಧಿಕಾರಿ ನಾಗರಾಜ್ ನಾಗೂರ ಅವಶ್ಯಕ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







