Yadgiri | ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ

ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್ಗಳು ಹಾಗೂ ಬಾರ್ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್, ಜಿಲ್ಲೆಯ ಕೆಲವು ವೈನ್ ಶಾಪ್ಗಳು ಹಾಗೂ ಬಾರ್ಗಳಿಂದ ಟಂಟಂ, ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನಗಳ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಅಕ್ರಮವಾಗಿ ಮದ್ಯ ಸಾಗಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಗ್ರಾಮಗಳಲ್ಲಿನ ಹೋಟೆಲ್ಗಳು, ಅಂಗಡಿಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಸಾರ್ವಜನಿಕರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮದ್ಯದ ದುಶ್ಚಟದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಯುವಕರು ಹಾಗೂ ಮಕ್ಕಳು ಕೂಡ ದುಶ್ಚಟಕ್ಕೆ ಒಳಗಾಗುವ ಅಪಾಯ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಮದ್ಯ ಸೇವಿಸಿ ವಾಹನ ಚಲಾಯಿಸುವುದರಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ವೈನ್ ಶಾಪ್ಗಳು ಹಾಗೂ ಬಾರ್ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅಗತ್ಯವಿದ್ದರೆ ಅವುಗಳ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಅಬಕಾರಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಅಕ್ರಮ ಮದ್ಯ ಸಾಗಾಟ ನಡೆಸುವ ವಾಹನಗಳ ಜಿಪಿಎಸ್ ಮಾಹಿತಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹುಲಿಬೆಟ್ಟ ಯಾದಗಿರಿ ತಾಲೂಕ ನೂತನ ಅಧ್ಯಕ್ಷ ಭೀಮರಾಯ ಬಾವುರ್ ಮಲ್ಲಿಕಾರ್ಜುನ ಮುಷ್ಟುರ, ಚಂದ್ರಶೇಖರ್ ಎಚ್, ಲಕ್ಷ್ಮಣ ಹಡಪದ್, ಹಣಮಂತ ದಾಸರು, ಮಲ್ಲು ಟೈಲರ್, ಇದ್ದರು






