Yadgiri | ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ

ಶಹಾಪುರ: ಹೆಂಡತಿಯೊಂದಿಗೆ ಜಗಳ ಮಾಡಿಕೊಂಡ ಕೋಪದಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿರುವ ಆಘಾತಕಾರಿ ಘಟನೆ ತಾಲೂಕಿನ ಗಂಗನಾಳ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಗೋಗಿ ಗ್ರಾಮದ ಸಮೀಪದ ಬೋರುಕ ಕಂಪನಿ ಬಳಿಯ ಕಾಲುವೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಗಂಗನಾಳ ಗ್ರಾಮದ ರೇಣುಕಾ ಹಾಗೂ ಶಾಂತಪ್ಪ ಬಿರದಾರ್ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ಬರು ಹೆಣ್ಣುಮಕ್ಕಳು ಹಾಗೂ ಎರಡು ವರ್ಷದ ಗಂಡು ಮಗುವಿದೆ.
ಶಾಂತಪ್ಪ ಮೂಲತಃ ಶಹಾಪುರ ತಾಲೂಕಿನ ಕಕ್ಕಸಗೇರ ಗ್ರಾಮದವನಾಗಿದ್ದು, ಪತ್ನಿಯ ತವರು ಗಂಗನಾಳ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಂಗಳವಾರ ಸಂಜೆ ದಂಪತಿ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು ಎನ್ನಲಾಗಿದೆ. ಬಳಿಕ ಶಾಂತಪ್ಪ ಮೂವರು ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದು, ಸಾನ್ವಿ (9) ಹಾಗೂ ಸೃಜನ್ (2) ಅವರನ್ನು ಕಾಲುವೆಗೆ ಎಸೆದಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ತಿಳಿದುಬಂದಿದೆ. ಮತ್ತೊಬ್ಬ ಮಗಳನ್ನು ತಾಯಿಯ ಆಶ್ರಯಕ್ಕೆ ಒಪ್ಪಿಸಲಾಗಿದೆ.
ಮಕ್ಕಳಿಗಾಗಿ ಶೋಧ ಕಾರ್ಯ ಮುಂದುವರಿಕೆ :
ಘಟನೆಗೆ ಸಂಬಂಧಿಸಿದಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಕಾಲುವೆಯಲ್ಲಿ ಮಕ್ಕಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪಿಎಸ್ಐ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. ಇಬ್ಬರು ಮಕ್ಕಳ ದೇಹಗಳು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಸಿಬ್ಬಂದಿ ಹಾಗೂ ಸಂಬಂಧಪಟ್ಟ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ಕೌಟುಂಬಿಕ ಕಲಹ ಹಾಗೂ ಪತ್ನಿಯ ಮೇಲಿನ ಕೋಪದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






