ಯಾದಗಿರಿ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಕ್ರಮ: ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಕುರಿತು ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
2025ರಲ್ಲಿ ಸರಾಸರಿಗಿಂತ ಶೇ.33ರಷ್ಟು ಹೆಚ್ಚು ಮಳೆಯಾಗಿತ್ತು. ಆದರೆ 2026ರಲ್ಲಿ ಇದುವರೆಗೆ ಸರಾಸರಿ 8.5 ಮಿ.ಮೀ ಮಳೆಯಾಗಬೇಕಾಗಿದ್ದರೆ, ಕೇವಲ 6.4 ಮಿ.ಮೀ ಮಾತ್ರ ಮಳೆಯಾಗಿದ್ದು, ಸುಮಾರು ಶೇ.25ರಷ್ಟು ಕಡಿಮೆ ಮಳೆಯಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಜಲಾಶಯಗಳಾದ ನಾರಾಯಣಪುರ ಜಲಾಶಯ ಕರ್ನಾಟಕದಲ್ಲಿ 491.15 ಮೀ., ಸನ್ನತಿ ಬ್ಯಾರೇಜ್ ನಲ್ಲಿ 373.90 ಮೀ. ಹಾಗೂ ಗುರುಸುನಗಿ ಜಲಾಶಯ ನಲ್ಲಿ 357.80 ಮೀ. ನೀರು ಸಂಗ್ರಹವಾಗಿದೆ ಎಂದು ಹೇಳಿದರು.
ಮಾರ್ಚ್ ತಿಂಗಳಲ್ಲಿ ಇದುವರೆಗೆ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ. ಆದರೆ ಈ ತಿಂಗಳಲ್ಲಿ 16 ಗ್ರಾಮಗಳು, ಏಪ್ರಿಲ್ನಲ್ಲಿ 25 ಗ್ರಾಮಗಳು ಹಾಗೂ ಮೇ ತಿಂಗಳಲ್ಲಿ 24 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಭೀಮರಾಯನಗುಡಿ, ಕಕ್ಕೇರಾ ಹಾಗೂ ಸುರಪುರ ಪಟ್ಟಣಗಳ ಎಲ್ಲಾ ವಾರ್ಡ್ಗಳಲ್ಲಿ ಮತ್ತು ಕೆಂಭಾವಿಯ 8 ವಾರ್ಡ್ಗಳಲ್ಲಿ ಪ್ರತಿದಿನ ನೀರು ಪೂರೈಕೆ ಮಾಡಲಾಗುತ್ತಿದೆ. ಶಹಾಪುರ, ಯಾದಗಿರಿ, ಹುಣಸಗಿ ಹಾಗೂ ಗುರುಮಿಠಕಲ್ ಪಟ್ಟಣಗಳ ಎಲ್ಲಾ ವಾರ್ಡ್ಗಳಲ್ಲಿ ಮತ್ತು ಕೆಂಭಾವಿಯ 15 ವಾರ್ಡ್ಗಳಲ್ಲಿ ಎರಡು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ವರ್ಷ ಯಾವುದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇಲ್ಲ ಎಂದು ಅವರು ತಿಳಿಸಿದರು.
ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಪ್ರತಿ 15 ದಿನಗಳಿಗೊಮ್ಮೆ ನೀರಿನ ಗುಣಮಟ್ಟ ಪರೀಕ್ಷೆ ನಡೆಸಲು ಹಾಗೂ ಯೋಗ್ಯವೆಂದು ವರದಿ ಬರುವ ನೀರನ್ನು ಮಾತ್ರ ಪೂರೈಸಲು ಸಂಬಂಧಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಬಾವಿ, ಕೊಳವೆ ಬಾವಿ, ಓವರ್ ಹೆಡ್ ಟ್ಯಾಂಕ್, ಆರ್ಒ ಪ್ಲಾಂಟ್ ಸೇರಿದಂತೆ ಎಲ್ಲಾ ಜಲಮೂಲಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಬೇಸಿಗೆ ಹಂಗಾಮಿನಲ್ಲಿ 67,885 ಹೆಕ್ಟೇರ್ ಬಿತ್ತನೆ ಗುರಿ ಇಡಲಾಗಿದ್ದು, ಇದರಲ್ಲಿ ಈಗಾಗಲೇ 65,535 ಹೆಕ್ಟೇರ್ ಅಂದರೆ ಶೇ.96.54ರಷ್ಟು ಬಿತ್ತನೆ ಪೂರ್ಣಗೊಂಡಿದೆ ಎಂದು ಹೇಳಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ಗರಿಷ್ಠ 44.2°C ತಾಪಮಾನ ದಾಖಲಾಗಿತ್ತು. ಈ ವರ್ಷದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗ್ರಾಮಗಳಲ್ಲಿ ಕಾರ್ಯಾಗಾರ, ಡಂಗೂರ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಇನ್ನೂ ಸಿಡಿಲು ಹಾಗೂ ಬಿಸಿಗಾಳಿಯಿಂದಾಗುವ ಅವಘಡಗಳಿಂದ ರಕ್ಷಣೆ ಪಡೆಯಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಾಮಗ್ರಿಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಕಳೆದ ವರ್ಷ ಜಿಲ್ಲೆಯಲ್ಲಿ ಇಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದರು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 58 ವಾರಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹಣೆ ಇದ್ದು, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವಾರ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನಷ್ಟು ಬೋರ್ವೆಲ್ಗಳ ಮೇಲೆ ಅವಲಂಬನೆಯಿರುವುದರಿಂದ ಈಗಾಗಲೇ 65 ಗ್ರಾಮಗಳಲ್ಲಿ ಬೋರ್ವೆಲ್ ಫ್ಲಷಿಂಗ್ ಹಾಗೂ ಖಾಸಗಿ ಬಾಡಿಗೆ ಬೋರ್ವೆಲ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಳೆದ ವರ್ಷ ನೀರಿನ ಸಮಸ್ಯೆ ಎದುರಿಸಿದ್ದ ಎಂಪಾಡ್, ರಸ್ತಾಪುರ, ಬೆನಕನಹಳ್ಳಿ ಮತ್ತು ಹೊಸಕೇರ ಗ್ರಾಮಗಳಲ್ಲಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಕುಡಿಯುವ ನೀರಿನ ಸರಬರಾಜಿಗೆ 08473-253758 ಸಹಾಯವಾಣಿ ಆರಂಭಿಸಲಾಗಿದೆ ಎಂದು ಹೇಳಿದರು.
ನೀರಿನ ಗುಣಮಟ್ಟ ಪರೀಕ್ಷೆಗೆ ಯಾದಗಿರಿ ನಗರದಲ್ಲಿ ಮೈಕ್ರೋ ಬಯಾಲಾಜಿಕಲ್ ಲ್ಯಾಬ್ ಆರಂಭಿಸಲಾಗಿದ್ದು, ಓವರ್ ಹೆಡ್ ಟ್ಯಾಂಕ್ಗಳ ಸ್ವಚ್ಛತೆ, ಕ್ಲೋರಿನೇಶನ್ ಹಾಗೂ ಬೋರ್ವೆಲ್ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ.
52 ಶಾಲೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಕಾಮಗಾರಿಗಳು, 92 ಆರ್ಒ ಪ್ಲಾಂಟ್ ದುರಸ್ತಿ ಕಾಮಗಾರಿಗಳು ಹಾಗೂ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿ 338 ಕಾಮಗಾರಿಗಳು ಪ್ರಗತಿಯಲ್ಲಿವೆ. Jal Jeevan Mission India ಯೋಜನೆಯಡಿ 525 ಕಾಮಗಾರಿಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಜೊತೆಗೆ ಜಲಧಾರೆ ಯೋಜನೆಯಡಿ ಶೇ.60ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೃಷಿ ಜಂಟಿ ನಿರ್ದೇಶಕ ರತೇಂದ್ರನಾಥ್ ಸುಗೂರ್, ಡಿಯುಡಿಸಿ ಯೋಜನಾ ನಿರ್ದೇಶಕ ಲಕ್ಷ್ಮಿ ಕಾಂತ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







