Yadgiri | ಜನಪರ ಪತ್ರಿಕೋದ್ಯಮ ಜಿಲ್ಲೆಯ ಅಭಿವೃದ್ಧಿಗೆ ಪೂರಕ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ಯಾದಗಿರಿ : ಗಡಿ ಜಿಲ್ಲೆಯಾದ ಯಾದಗಿರಿಯ ಜನರ ಸಮಸ್ಯೆಗಳನ್ನು ಪತ್ರಕರ್ತರು ತಮ್ಮ ನೈಜ ಹಾಗೂ ಜನಪರ ವರದಿಗಳ ಮೂಲಕ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕೆ ನೆರವಾಗುತ್ತಿರುವುದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪರ ಕಾಳಜಿ ಹೊಂದಿರುವ ಪತ್ರಕರ್ತರು ಹಲವು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದಿದ್ದು, ಅವುಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು. ಇನ್ನೂ ಸಾಕಷ್ಟು ಕೆಲಸಗಳು ಬಾಕಿಯಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.
ಪತ್ರಕರ್ತರು ಯಾವುದೇ ವಿಷಯವನ್ನು ಸಮಗ್ರ ಮಾಹಿತಿ ಸಂಗ್ರಹಿಸಿ, ಜವಾಬ್ದಾರಿಯುತ ಹಾಗೂ ಸಕಾರಾತ್ಮಕವಾಗಿ ವರದಿ ಮಾಡಿದಾಗ ಮಾತ್ರ ಜನರಲ್ಲಿ ಮಾಧ್ಯಮಗಳ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚುತ್ತದೆ. ಪತ್ರಕರ್ತರ ಸಂಘಟನೆ ಕೂಡ ಜನಪರ ಸಮಸ್ಯೆಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಗೌರವ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಮತ್ತು ಆಡಳಿತ ವ್ಯವಸ್ಥೆ ಸಾಮಾಜಿಕ ಕಳಕಳಿ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ರಾಚಣ್ಣಗೌಡ ಮುದ್ನಾಳ ಹಾಗೂ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ಪತ್ರಕರ್ತರ ಸಂಘಟನೆಗಳು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಜಿಲ್ಲೆಯ ಜನರ ಸಮಸ್ಯೆಗಳಿಗೆ ಗಟ್ಟಿಯಾದ ಧ್ವನಿಯಾಗಿ ಕಾರ್ಯನಿರ್ವಹಿಸಿದರೆ ಆಡಳಿತ ವ್ಯವಸ್ಥೆ ಇನ್ನಷ್ಟು ಸ್ಪಂದಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಮುದ್ರಣ ಮಾಧ್ಯಮಗಳ ಮೇಲಿನ ಜನರ ವಿಶ್ವಾಸ ಇಂದಿಗೂ ಉಳಿದಿರುವುದು ಪತ್ರಕರ್ತರ ಪ್ರಾಮಾಣಿಕ ಕಾರ್ಯದ ಫಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ಗುಂಡಪ್ಪ ಕಲಬುರಗಿ ಸೇರಿದಂತೆ ಹಲವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಡಾ. ಕಮಲಾ ಇಂದೂಧರ ಸಿನ್ನೂರ ಅವರ ‘ಹೊಸ ಕನ್ನಡ ಸಾಹಿತ್ಯದಲ್ಲಿ ಅಕ್ಕ ಮಹಾದೇವಿ’ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಕೃತಿಯ ಕುರಿತು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಷ್ಚಂದ್ರ ಕೌಲಗಿ ಮಾತನಾಡಿ, ಅಕ್ಕ ಮಹಾದೇವಿಯ ಜೀವನ, ಆಧ್ಯಾತ್ಮಿಕ ಸಾಧನೆ ಹಾಗೂ ವಚನ ಸಾಹಿತ್ಯದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ಇಂದೂಧರ ಸಿನ್ನೂರ, ಉಪಾಧ್ಯಕ್ಷರಾಗಿ ದಿನೇಶ್ ವಿಸಿ, ಪ್ರಧಾನ ಕಾರ್ಯದರ್ಶಿಯಾಗಿ ಖುದಾನ್ಸಾಬ್, ಸಂಘಟನಾ ಕಾರ್ಯದರ್ಶಿಯಾಗಿ ರೂಪೇಶ್ ಹಾಗೂ ಖಜಾಂಚಿಯಾಗಿ ನಾಗಪ್ಪ ಮಾಲಿ ಪಾಟೀಲ್ ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತರು ಹಾಗೂ ಪತ್ರಿಕೆ ವಿತರಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ನಗರಸಭೆ ಆಯುಕ್ತ ಉಮೇಶ್ ಚವ್ಹಾಣ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಉದ್ಯಮಿಗಳಾದ ಮಲ್ಲಿಕಾರ್ಜುನ ಶಿರಗೋಳ, ದಿನೇಶ್ ದೋಕಾ, ಭೀಮಾವತಿ, ಡಾ. ಕಮಲಾ ಸಿನ್ನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪತ್ರಕರ್ತ ನಾಗಪ್ಪ ಮಾಲಿ ಪಾಟೀಲ್ ಸ್ವಾಗತಿಸಿದರು. ರಿಯಾಜ್ ಪಟೇಲ್ ವರ್ಕನಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾಲಕ್ಕೆ ತಕ್ಕಂತೆ ಪತ್ರಕರ್ತರು ವೃತ್ತಿಪರ ಕೌಶಲ್ಯ ಬೆಳೆಸಿಕೊಳ್ಳಬೇಕು :
ಮಾಧ್ಯಮ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಲ್ಲಿ ಅಪಾರ ಬದಲಾವಣೆಗಳಾಗಿದ್ದು, ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಪತ್ರಕರ್ತರು ತಮ್ಮ ಕಾರ್ಯಶೈಲಿ, ಸಮಯಪ್ರಜ್ಞೆ ಹಾಗೂ ವೃತ್ತಿಪರ ಕೌಶಲ್ಯವನ್ನು ಕಾಲಕ್ಕೆ ತಕ್ಕಂತೆ ರೂಪಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್ ಸಲಹೆ ನೀಡಿದರು.






