Yadgiri | ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚಿನ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ: ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯದ ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಹಾಗೂ ಮಾಜಿ ಸಚಿವ ಎಚ್. ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ (ಎಂಎಲ್ಸಿ) ನೇಮಿಸಿ ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಯಾದಗಿರಿ ಜಿಲ್ಲಾ ಮಾದಿಗ ದಂಡೋರ ಸಮಿತಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಬಳಿಕ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಗಣೇಶ ದುಪ್ಪಲಿ, ಕರ್ನಾಟಕದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯವು ಪರಿಶಿಷ್ಟ ಜಾತಿಗಳಲ್ಲಿಯೇ ಅತಿದೊಡ್ಡ ಸಮುದಾಯವಾಗಿದ್ದರೂ ರಾಜಕೀಯವಾಗಿ ನಿರೀಕ್ಷಿತ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗದಲ್ಲಿ ನಡೆದ ಎಸ್ಸಿ-ಎಸ್ಟಿ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿಗೆ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್ಗೆ ಬೆಂಬಲ ನೀಡಿತ್ತು. ಆದರೆ ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಸಮರ್ಪಕ ಸ್ಥಾನಮಾನ ಸಿಕ್ಕಿಲ್ಲ ಎಂದು ಆರೋಪಿಸಿದರು.
ಈ ಬಾರಿ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಕನಿಷ್ಠ ನಾಲ್ಕು ಸಚಿವ ಸ್ಥಾನಗಳನ್ನು ನೀಡಬೇಕು. ಕಳೆದ ಬಾರಿ ಬಲಗೈ ಸಮುದಾಯಕ್ಕೆ ಮೂರು ಸಚಿವ ಸ್ಥಾನಗಳೊಂದಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿತ್ತು. ಆದರೆ ಮಾದಿಗ ಸಮುದಾಯಕ್ಕೆ ಕೇವಲ ಎರಡು ಸಚಿವ ಸ್ಥಾನಗಳು ಮಾತ್ರ ದೊರೆತಿದ್ದು, ಉಪಮುಖ್ಯಮಂತ್ರಿ ಹುದ್ದೆಯೂ ಸಿಕ್ಕಿರಲಿಲ್ಲ ಎಂದು ಅವರು ಹೇಳಿದರು.
ಜಿಲ್ಲಾಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾದಿಗ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಯಾದಗಿರಿ ಜಿಲ್ಲೆಯಲ್ಲಿ ಸುಮಾರು ಎರಡು ಲಕ್ಷ ಮಾದಿಗ ಜನಸಂಖ್ಯೆ ಇದ್ದರೂ ಸಮುದಾಯದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿಲ್ಲ ಎಂದು ದೂರಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯೊಂದಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿತ್ತು. ಅದೇ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರವೂ ಮಾದಿಗ ಸಮುದಾಯಕ್ಕೆ ಪ್ರಭಾವಿ ಖಾತೆಗಳೊಂದಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಕೆ.ಹೆಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವುದರೊಂದಿಗೆ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮುದಾಯದ ಇನ್ನೂ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯಸಮ್ಮತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಮಾದಿಗ ಸಮುದಾಯದ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಲ್ಲು ಬೆಳಗೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನಡುಮನಿ, ರಾಜು ಕಡೇಚೂರ್, ರವಿ ಬುರನೋರ್, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಪೋಲಪ್ಪ ಎಂ ನಾರಾಯಣಣ್ಣೋರ್, ಭೀಮರಾಯ ಸಾತನೂರ್, ತಿಪ್ಪಣ್ಣ ಗೊಂದೆನೂರ್, ವಿಲ್ಸೇನ್ ಹಾಲಗೇರಾ, ಮಲ್ಲು ಕುಮನೂರ್, ಶರಣಪ್ಪ ವಡಗೇರಾ, ಶರಣಪ್ಪ ಹಚ್ಚೋಲಾ, ದೇವರಾಜ ಚೇಲೇರಿ, ಬಸವರಾಜ ವನಿಕೇರಿ, ಬಸಲಿಂಗ ಬಾಡಿಯಾಳ್, ದೇವಪ್ಪ ಲಿಂಗೇರಿ, ಭೀಮರಾಯ ಕೋನಳಿ, ಮಲ್ಲು ಅಚ್ಚಿಕೇರಿ, ಮಲ್ಲಿಕಾರ್ಜುನ ಮುಂಡರಗಿ, ಸಾಬಣ್ಣ ಕುರಿಯಾಳ, ಸಾಬಣ್ಣ ಹುಲಕಲ್, ದುರ್ಗಪ್ಪ ಒರುಂಚಿ, ಮರಿಲಿಂಗ ಕೌಲಿ, ಪ್ರಭು, ಹಾಲಗೇರಾ, ಅಂಜಪ್ಪ ಸೈದಾಪೂರ್, ಮರೆಪ್ಪ ಬಿಳ್ಹಾರ್, ಸೇರಿದಂತೆ ಇತರರು ಇದ್ದರು.






