Yadgiri | ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರಿಗೆ ಮೊದಲ ಆದ್ಯತೆ : ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ಮತಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಜನರಿಗೆ ಮೂಲಸೌಕರ್ಯ ಒದಗಿಸುವ ಕೆಲಸವನ್ನು ನಿರಂತರವಾಗಿ ಮುಂದುವರಿಸಲಾಗುತ್ತಿದೆ ಎಂದು ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.
ಬುಧವಾರ ಸೈದಾಪುರ ಗ್ರಾಮದಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ನಾಲ್ಕು ನೂತನ ಕೊಠಡಿಗಳ ಉದ್ಘಾಟನೆ, ರಾಚನಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ, ಕಂಪ್ಯೂಟರ್ ಲ್ಯಾಬ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಸಹಿಸುವುದಿಲ್ಲ. ವೈಯಕ್ತಿಕ ಕೆಲಸಕ್ಕಾಗಿ ಅಧಿಕಾರಿಗಳಿಗೆ ಕರೆ ಮಾಡುವುದಿಲ್ಲ. ಆದರೆ ಸಾರ್ವಜನಿಕ ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿದರೆ ಪ್ರಶ್ನಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.
ಕ್ಷೇತ್ರದ ವಸತಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ತಾವು ಬದ್ಧರಾಗಿದ್ದು, ಅನುದಾನ ಒದಗಿಸುವ ಕೆಲಸವನ್ನು ಜನಪ್ರತಿನಿಧಿಗಳು ಮಾಡಿದರೆ, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದು ತಿಳಿಸಿದರು.
ಸಹಾಯಕ ಆಯುಕ್ತ ಶ್ರೀಧರ ಗೋಟೂರ ಮಾತನಾಡಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಶಾಸಕ ಶರಣಗೌಡ ಕಂದಕೂರ ವಿಶೇಷ ಆದ್ಯತೆ ನೀಡುತ್ತಿದ್ದು, ಒಂದೇ ಶಾಲೆಗೆ 2 ಕೋಟಿ ರೂ. ಅನುದಾನ ನೀಡಿರುವುದು ಅವರ ಶಿಕ್ಷಣದ ಮೇಲಿನ ಬದ್ಧತೆಯನ್ನು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಳೆದ ಸಾಲಿನ ನೀಟ್ ಪರೀಕ್ಷೆಯಲ್ಲಿ 1866ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಮಾನಸಾ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಶೇ.93 ಅಂಕ ಗಳಿಸಿದ ಅಫ್ಸಾನಾ ಅವರನ್ನು ಸನ್ಮಾನಿಸಲಾಯಿತು. ಬಳಿಕ ಶಾಸಕರು ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಕುಳಿತು ಭೋಜನ ಸವಿದರು.
ಗುರು ಪೂರ್ಣಿಮೆ ಅಂಗವಾಗಿ ಮಾತನಾಡಿದ ಶಾಸಕ ಕಂದಕೂರ, ಕೊಪ್ಪಳದ ಶ್ರೀ ಗವಿಮಠದ ಶ್ರೀಗಳು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಮ್ಮ ಜೀವನದ ಮಾರ್ಗದರ್ಶಕರಾಗಿದ್ದು, ಸಂಕಷ್ಟದ ಸಂದರ್ಭದಲ್ಲಿ ಧೈರ್ಯ ತುಂಬಿದ ಅವರ ಮಾರ್ಗದರ್ಶನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಜನರ ಸಮಸ್ಯೆ ಆಲಿಸುವ ತಾಳ್ಮೆ ಅಧಿಕಾರಿಗಳಲ್ಲಿ ಇರಬೇಕು :
ಗ್ರಾಮ ಪಂಚಾಯಿತಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ, ಕುಡಿಯುವ ನೀರಿನಂತಹ ಮೂಲಭೂತ ಸಮಸ್ಯೆಗಳಿಗೂ ಜನರು ಶಾಸಕರ ಬಳಿ ಬರಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಷಾದನೀಯ. ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಪರಿಹಾರಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.
ರಸ್ತೆ ನಿರ್ಮಾಣಕ್ಕೆ ಸಹಕರಿಸಿದ ರೈತರಿಗೆ ಅಭಿನಂದನೆ :
ರಾಚನಳ್ಳಿ ವಸತಿ ಶಾಲೆಗೆ ಸಂಪರ್ಕಿಸುವ ರಸ್ತೆ ನಿರ್ಮಾಣ ಬಹುಕಾಲದ ಬೇಡಿಕೆಯಾಗಿತ್ತು. ಸ್ಥಳೀಯ ರೈತರ ಸಹಕಾರದಿಂದ ರಸ್ತೆ ನಿರ್ಮಿಸಲು ಸಾಧ್ಯವಾಗಿದ್ದು, ಸಹಕರಿಸಿದ ಎಲ್ಲ ರೈತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಶಾಲೆ, ಕ್ಷೇತ್ರ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಶಾಸಕರಿಗೆ ಪಾಲಕರ ಮೆಚ್ಚುಗೆ :
ಶಾಲೆಗೆ ರಸ್ತೆ ನಿರ್ಮಿಸುವ ಭರವಸೆಯನ್ನು ನೀಡಿದ್ದ ಶಾಸಕ ಶರಣಗೌಡ ಕಂದಕೂರ ಅವರು ಕೊಟ್ಟ ಮಾತಿನಂತೆ ರಸ್ತೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಉದ್ಘಾಟಿಸಿದ್ದಾರೆ. ಮಕ್ಕಳ ಶಿಕ್ಷಣದ ಬಗ್ಗೆ ಅವರಿಗಿರುವ ಕಾಳಜಿ ಶ್ಲಾಘನೀಯ ಎಂದು ಪಾಲಕರು ಅಭಿನಂದಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದಣ್ಣ ಅಣಬಿ, ತಾಪಂ ಇಒ ಮಹಾದೇವ, ಎಇಇ ಟಿ.ಬನ್ನಪ್ಪ, ಚಂದ್ರಶೇಖರ, ಸಿಪಿಐ ಶಿವಪ್ಪ, ಜೆಸ್ಕಾ ಎಇಇ ಮಾರ್ಕಂಡಯ್ಯಾ, ಪ್ರಮುಖರಾದ ಚಂದ್ರಗೌಡ, ಅಜಯರಡ್ಡಿ ಯಲ್ಹೇರಿ, ಬಸವರಾಜಪ್ಪ ಗೌಡ, ಗುರುನಾಥರಡ್ಡಿ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಪ್ರಾಚಾರ್ಯೆ ಶಿವಲೀಲಾ, ಸ್ವಾಗತಿಸಿದರು. ಚಂದ್ರಶೇಖರ ಗೋಗಿ ಅವರ ತಂಡದಿಂದ ಪ್ರಾರ್ಥನೆ ಗೀತೆ ನಡೆಯಿತು.






